
ರಾಜ್ಯದಲ್ಲಿ ನೂತನ ಕೈಗಾರಿಕೆಗಳನ್ನು ಆರಂಭಿಸಿ ಯುವ ಜನಾಂಗಕ್ಕೆ ಉದ್ಯೋಗ ದೊರಕಿಸಿಕೊಡಲು ಕೇಂದ್ರ ಸರ್ಕಾರ ಆಸಕ್ತಿ ತಳೆದಿದೆ, ಆದರೆ ರಾಜ್ಯ ಸರ್ಕಾರದ ಅಸಹಕಾರದಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ದೂರಿದರು.
ಮಂಡ್ಯನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮೈಸೂರು ಭಾಗದ ತುಮಕೂರು, ಹಾಸನ, ಮಂಡ್ಯ, ಮೈಸೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೂತನ ಕಾರ್ಖಾನೆಗಳನ್ನು ಆರಂಭಿಸಲು ಹಲವು ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಆದರೆ ರಾಜ್ಯ ಸರ್ಕಾರ ಆಸಕ್ತಿ ತೋರುತ್ತಿಲ್ಲ ಅಸಮಾಧಾನ ವ್ಯಕ್ತಪಡಿಸಿದರು.
ಕೈಗಾರಿಕಾಭಿವೃದ್ದಿ ಬಗ್ಗೆ ಸಣ್ಣ ಚರ್ಚೆಗೂ ಅವಕಾಶ ಕಲ್ಪಿಸದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರಿಗೆ ಪತ್ರ ಬರೆದಿದ್ದೇನೆ, ರಾಜ್ಯದಲ್ಲಿ ಆಟೋ ಮೊಬೈಲ್ ಮತ್ತು ವಿದ್ಯುತ್ ಚಾಲಿತ ವಾಹನಗಳ ಉತ್ಪಾದನಾ ಘಟಕ ತೆರೆಯಲು ವಿಫುಲ ಅವಕಾಶಗಳಿವೆ. ಸಿಮೆಂಟ್ ಕಾರ್ಖಾನೆ ಆರಂಭಕ್ಕೂ ಅವಕಾಶವಿದ್ದು ಈ ಸಂಬಂಧ ಸಮಸ್ಯೆ ನಿವಾರಣೆಗೆ ಬದ್ದನಾಗಿರುವುದಾಗಿ ತಿಳಿಸಿದರು.
ವೇದಿಕೆಯಲ್ಲಿ ವಿವಿಧ ಉದ್ದಿಮೆಗಳ ಪ್ರತಿನಿಧಿಗಳಾದ ಕೊಹ್ಲಿ, ಕುಪ್ಪು ಸದಾಶಿವ ಮೂರ್ತಿ, ಸುರೇಂದ್ರ ನಾಥ್, ರವಿಕುಮಾರ್, ಶರ್ಮಾ, ಸಂಜಯ್ ಬಂಗೇರಾ, ಅಮಿತ್ ಮುಖರ್ಜಿ ಸೇರಿದಂತೆ ಹಲವರಿದ್ದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕರಾದ ಹೆಚ್.ಟಿ.ಮಂಜು, ವಿವೇಕಾನಂದ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಕೆ.ಟಿ.ಶ್ರೀಕಂಠೇಗೌಡ, ಮುಖಂಡರಾದ ಕೆ.ಎಸ್.ವಿಜಯ್ ಆನಂದ್, ಬಿ.ಆರ್.ರಾಮಚಂದ್ರು, ನಗರಸಭೆ ಅಧ್ಯಕ್ಷ ನಾಗೇಶ್, ಪಕ್ಷದ ಜಿಲ್ಲಾಧ್ಯಕ್ಷ ಡಿ.ರಮೇಶ್, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು ವೇದಿಕೆಯಲ್ಲಿ ಆಸೀನರಾಗಿದ್ದರು.

Leave a Reply