
ಮಳವಳ್ಳಿ ತಾಲ್ಲೂಕು ನೆಲ್ಲೂರು ಗ್ರಾಮದ ಏಳು ವರ್ಷದ ಕುಮಾರಿ ಸಾನ್ವಿ ಎಂಬ ಮಗುವು ಮಿಮ್ಸ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿರುವುದು ತೀರ ನೋವಿನ ಸಂಗತಿಯಾಗಿರುತ್ತದೆ.
ಕುಮಾರಿ ಸಾನ್ವಿ ಎಂಬ ಬಾಲಕಿಯ ಸಾವಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡದೆ ವೈದ್ಯರ ನಿರ್ಲಕ್ಷವೆಂಬ ಗುರುತರವಾದ ಆರೋಪ ಬಂದಿರುವುದರಿಂದ ಸದರಿ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಸತ್ಯಾಸತ್ಯತೆಯನ್ನು ಪರಿಶೀಲಿಸುವ ಸಲುವಾಗಿ ತಜ್ಞರ ಸಮಿತಿಯನ್ನು ರಚಿಸಿ ಆದೇಶಿಸಿದೆ.
ಸಮಿತಿಯಲ್ಲಿ ಮೈಸೂರು ವೈದ್ಯಕೀಯ ಕಾಲೇಜಿನ ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ: ಪ್ರದೀಪ್ ಅವರು ಅಧ್ಯಕ್ಷರಾಗಿ, ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದಲ್ಲಿರುವ ಮೂಳೆ ಮತ್ತು ಕೀಲು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ: ಮಹೇಶ್, ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ: ಬಾಲಕೃಷ್ಣ, ಅರಿವಳಿಕೆ ವಿಭಾಗದ ಮುಖ್ಯಸ್ಥ ಡಾ: ಚೇತನನಂದ ಅವರುಗಳು ಸದಸ್ಯರಾಗಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ: ಸೋಮಶೇಖರ್ ಅವರು ಸದಸ್ಯ ಕಾರ್ಯದರ್ಶಿಗಳಾಗಿ ಸಮಿತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಸಮಿತಿಯು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೂಡಲೇ ತನಿಖೆ ನಡೆಸಿ ತನಿಖಾ ವರದಿಯನ್ನು 15 ದಿನದೊಳಗಾಗಿ ತಪ್ಪದೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ್ ಸೂಚಿಸಿದ್ದಾರೆ.

Leave a Reply