
ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಗೆ ಸಂಬಂಧಪಟ್ಟಂತೆ ಕೂಲಿ ಕಾರ್ಮಿಕರ ಹಣ ದುರುಪಯೋಗ ಆಗಿದ್ದು, ಸಂಬಂಧಿಸಿದ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ಕುಮಾರ್ ಅವರು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಿಯವರಿಗೆ ಮನವಿ ನೀಡಿದರು.
ಗ್ರಾಮ ಪಂಚಾಯಿತಿಯಲ್ಲಿ ತಮಗಿಷ್ಟ ಬಂದ ಹಾಗೆ ನರೇಗಾ ಯೋಜನೆಯಲ್ಲಿ ಕಾಮಗಾರಿ ಮಾಡುವ ಮೂಲಕ ಕಾಲುವೆ ಅಭಿವೃದ್ಧಿ ಮಾಡುವ ನೆಪದಲ್ಲಿ ಭಾರಿ ಭ್ರಷ್ಟಾಚಾರ ಮಾಡಲಾಗಿದೆ. ಕಾಲುವೆ ಅಭಿವೃದ್ಧಿ ಕೆಲಸದಲ್ಲಿ ಹಾಗೂ ಸಿಸಿ ಕಾಮಗಾರಿಯಲ್ಲಿ ಅಕ್ರಮವಾಗಿರುವುದು ಕಂಡು ಬಂದಿರುತ್ತದೆ. ಇನ್ನು ಉಳಿದ 2024–25ನೇ ಸಾಲಿನ ಮತ್ತು 2025–26ನೇ ಸಾಲಿನ ಕಾಲುವೆ ಅಭಿವೃದ್ಧಿಗಳು ಮತ್ತು ಸಿಸಿ ರಸ್ತೆ ಮತ್ತು ಸಿಸಿ ಚರಂಡಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಎನ್ಎಂಎಂಎಸ್ ಹಾಜರಾತಿಯಲ್ಲಿ ಅಕ್ರಮವಾಗಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ ಎಂದು ಆರೋಪಿಸಿದರು.
ಅಕ್ರಮ ಎಸಗಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ನರೇಗಾ ಯೋಜನೆಯ ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ತಗ್ಗಹಳ್ಳಿ ಗ್ರಾಪಂ ವ್ಯಾಪ್ತಿಯ ಕಮ್ಮನಾಯಕನಹಳ್ಳಿ, ಮಲ್ಲಿಗೆರೆ, ಕೋಲಕಾರನದೊಡ್ಡಿ ಗ್ರಾಮಗಳ ಕಾಲುವೆ ಅಭಿವೃದ್ಧಿ ಪಡಿಸುವುದಾಗಿ ಹೇಳಿ ಭ್ರಷ್ಟಾಚಾರ ನಡೆದಿದೆ. ಹಾಗಾಗಿ ಇವರ ವಿರುದ್ಧ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಹುಚ್ಚೇಗೌಡ ಇದ್ದರು.

Leave a Reply