
ಮಂಡ್ಯ : ನೀರು ಅತ್ಯಮೂಲ್ಯ ಸಂಪನ್ಮೂಲವಾಗಿದ್ದು, ನೀರಿನ ಸಂರಕ್ಷಣೆ ಕುರಿತು ಜಾಗೃತಿ ಅಗತ್ಯವಾಗಿದೆ ಎಂದು ಮಂಡ್ಯ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಲೋಕೇಶ್ಮೂರ್ತಿ ತಿಳಿಸಿದರು.
ತಾಲೂಕು ಪಂಚಾಯಿತಿ ಮಂಡ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ನೀರುಗಂಟಿಗಳಿಗೆ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಪ್ರಾಯೋಗಿಕ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.
ನೀರು ಗಂಟಿಗಳು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ತರಬೇತಿಯನ್ನು ಪಡೆದು ಪೈಪ್ಲೈನ್ಗಳ ದುರಸ್ಥಿ, ಇತರೆ ಸಮಸ್ಯೆಗಳು ಬಂದಲ್ಲಿ ಅವುಗಳ ಬಗ್ಗೆ ನಿಗಾ ವಹಿಸಿ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.
ಮಂಡ್ಯ ತಾಲೂಕಿನ ಹುಲಿವಾನ, ಹೊಡಾಘಟ್ಟ, ಬಿ. ಹೊಸೂರು, ಮಾರಗೌಡನಹಳ್ಳಿ, ಆಲಕೆರೆ, ಕೀಲಾರ, ಉಪ್ಪರಕನಹಳ್ಳಿ ಮತ್ತು ಕೆರಗೋಡು ಗ್ರಾಮ ಪಂಚಾಯಿತಿಗಳ ಪಿಡಿಓ ಮತ್ತು ನೀರು ಗಂಟಿಗಳಿಗೆ ತರಬೇತಿ ನೀಡಲಾಯಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗರಾಜು, ಪಿಡಿಓ ವಿನಯ್ಕುಮಾರ್ ಇತರರು ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು.

Leave a Reply