Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಡಿ.31 ರಿಂದ ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗಾಗಿ  ಮುಷ್ಕರ

ಮಂಡ್ಯ:ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಡಿ.31 ರಿಂದ ರಾಜ್ಯದಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ನಂಜುಂಡಯ್ಯ, ಎಐಟಿಯುಸಿ ಮಂಡ್ಯ ವಿಭಾಗ ಅಧ್ಯಕ್ಷ ಮಲ್ಲೇಶ್,
ಕೆಎಸ್‌ಆರ್‌ಟಿಸಿ ಸ್ಟಾಪ್ ವರ್ಕರ್ಸ್ ಫೆಡರೇಷನ್ ಉಪಾಧ್ಯಕ್ಷ ಎಂ. ವಿಜಯಕುಮಾರ್  ತಿಳಿಸಿದರು.

ಮಂಡ್ಯದಲ್ಲಿ ಜಂಟಿ‌ಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿದಿನ ಸುಮಾರು ಒಂದು ಕೋಟಿಗೂ ಹೆಚ್ಚಿನ ಪ್ರಯಾಣಿಕ ರನ್ನು ರಾಜ್ಯದ ಮೂಲೆ ಮೂಲೆಗೆ ತಲುಪಿಸುವ ಮೂಲಕ ಹಾಗೂ ಶಕ್ತಿ ಯೋಜನೆಯ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿರುವ ಸಾರಿಗೆ ನಿಗಮಗಳ ಒಂದು ಲಕ್ಷಕ್ಕೂ ಅಧಿಕ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿರು ವುದನ್ನು ಖಂಡಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ ಎಂದರು.

ಸಾರಿಗೆ ಸಚಿವರಿಗೆ, ಮುಖ್ಯಮಂತ್ರಿಗಳಿಗೆ, ಸಾರಿಗೆ ನಿಗಮಗಳ ಆಡಳಿತ ವರ್ಗಕ್ಕೆ ಈಗಾಗಲೇ ಹಲವು ಬಾರಿ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಗಿತ್ತು.ಆದರೂ ಈವರೆಗೂ ಸರ್ಕಾರದಿಂದಾಗಲಿ ಅಥವಾ ಸಾರಿಗೆ ನಿಗಮಗಳ ಆಡಳಿತ ವರ್ಗದಿಂದಾಗಲಿ ಯಾವುದೇ ರೀತಿಯ ಸ್ಪಂದನೆ ಸಿಗದಿರುವುದು ಕಾರ್ಮಿಕರಿಗೆ ತೀವ್ರ ನಿರಾಶೆ ಮೂಡಿಸಿದೆ ಎಂದರು.
ಮುಷ್ಕರ ನಡೆಸುವ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿ.9 ರಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮುನ್ನ 21 ದಿನ ಮುಂಚಿತವಾಗಿ ನೋಟಿಸ್ ನೀಡಬೇಕು. ನೋಟಿಸ್‌ ನೀಡಿ ಗಮನಕ್ಕೆ ತಂದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿದರು.

ಈ ಮುಷ್ಕರ ಯಶಸ್ವಿಗೆ ಸಾರಿಗೆ ನಿಗಮಗಳ ಇತರೆ ಕಾರ್ಮಿಕ ಸಂಘಟನೆಗಳು, ವಿವಿಧ ಸಂಘ,ಸಂಸ್ಥೆಗಳು ಕೈಜೊಡಿಸಿವೆ. ಸಾರ್ವಜನಿಕರು ಮುಷ್ಕರಕ್ಕೆ ಸಹಕಾರ ನೀಡುವ ಮೂಲಕ ನಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದರು.

2020 ರ ಜ. 1 ರಿಂದ 38 ತಿಂಗಳ ವೇತನ ಹಿಂಬಾಕಿ ಪಾವತಿಸಬೇಕು. ಜ.2024 ರಿಂದ ಹೊಸ ವೇತನ ಪರಿಷ್ಕರಣೆ,ನಿವೃತ್ತರಾದ ನೌಕರರಿಗೆ 2024ರ ಜೂನ್ 27ರ ಸುತ್ತೋಲೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು.ಎಲ್ಲ ನೌಕರರಿಗೆ ಪ್ರತಿ ತಿಂಗಳೂ ಹೊರ ರೋಗಿ ಚಿಕಿತ್ಸೆ ವೆಚ್ಚಕ್ಕಾಗಿ ₹ 2 ಸಾವಿರ ನೀಡಬೇಕು, ಎಲ್ಲ ನೌಕರರಿಗೆ ಉಚಿತ ಔಷಧ ಪೂರೈಸಬೇಕು, ಇ.ಎಸ್‌.ಐ ಮಾದರಿಯಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು,ಗುತ್ತಿಗೆ ಆಧಾರದಲ್ಲಿ ತೆಗೆದುಕೊಂಡಿರುವ ಚಾಲಕ, ತಾಂತ್ರಿಕ ಸಿಬ್ಬಂದಿಯನ್ನು ಸಂಸ್ಥೆಯ ನೌಕರರನ್ನಾಗಿ ನೇಮಿಸಬೇಕು, ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿ ನೇಮಕಾತಿ ಶೀಘ್ರ ಮಾಡಬೇಕು, ನೌಕರರ ಮುಂಬಡ್ತಿಗೆ ಕ್ರಮ ತೆಗೆದುಕೊಳ್ಳುವುದು ಸೇರಿದಂತೆ ಇನ್ನಿತರ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!