Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆ ಕುರಿತು ವರದಿ ಸಲ್ಲಿಸಿ: ಆಶಿತ್ ಮೋಹನ್ ಪ್ರಸಾದ್

ಮಾಹಿತಿ ಹಕ್ಕು ಅಧಿನಿಯಮವನ್ನು ಅನುಷ್ಠಾನ ಗೊಳಿಸಿ 20 ವರ್ಷವಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ವರದಿಯನ್ನು ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾದ ನಿವೃತ್ತ ಐ.ಪಿ.ಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಕ್ಟೋಬರ್ 12 ರಂದು 20 ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ಮಾಹಿತಿ ಹಕ್ಕು ಆಯೋಗವು ರಾಜ್ಯಮಟ್ಟದಲ್ಲಿ ಮಾಹಿತಿ ಹಕ್ಕು ಅಧಿನಿಯಮ ಪರಿಣಾಮಾಕಾರಿ ಅನುಷ್ಠಾನದ ಬಗ್ಗೆ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದರು.

ಹೆಚ್ಚು ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ಸ್ವೀಕರಿಸುವ ಕಚೇರಿಗಳು ಲೋಕ್ ಅದಾಲತ್ ಮಾದರಿಯಲ್ಲಿ  ಒಂದು ದಿನ ನಿಗದಿಪಡಿಸಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡಿ ಇದರಿಂದ ಬಹಳಷ್ಟು ಅರ್ಜಿಗಳು ಆಯೋಗದ ಬಳಿ ಬರುವುದಿಲ್ಲ ಎಂದರು.

ಮಾಹಿತಿ ಹಕ್ಕು ಅಧಿನಿಯಮದ 4(1)ಎ ಮತ್ತು 4(1) ಬಿ ವಿವರವನ್ನು ಪ್ರಕಟಿಸಿ ಇದರಿಂದ ಬಹಳಷ್ಟು ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು. ಮಾಹಿತಿ ಹಕ್ಕು ನಿಯಮದಲ್ಲಿ ನೀಡಬೇಕಿರುವ ಹಾಗೂ ಗೌಪ್ಯತೆ ಕಾಪಾಡುವ ದಾಖಲೆಗಳ ಬಗ್ಗೆ ಉಲ್ಲೇಖಿಸಲಾಗಿದ್ದು,ಅದರಂತೆ ಅನುಸರಿಸಿ ಮಾಹಿತಿ ನೀಡಿ ಎಂದರು.

ದೇಶದಲ್ಲಿ ಪ್ರತಿ ವರ್ಷ ಸರಾಸರಿ 60 ಲಕ್ಷ ಆರ್.ಟಿ.ಐ ಅರ್ಜಿ ಹಾಗೂ ಕರ್ನಾಟಕ ರಾಜ್ಯದಲ್ಲಿ ಸರಾಸರಿ 4.5 ಲಕ್ಷ ಅರ್ಜಿ ಸ್ವೀಕೃತ ವಾಗುತ್ತದೆ. ಇದರಲ್ಲಿ 25000 ಅರ್ಜಿಗಳು ಎರಡನೇ ಮೇಲ್ಮನವಿ ಆಯೋಗಕ್ಕೆ ಬರುತ್ತದೆ  ಎಂದರು.

ಸ್ವಯಂ‌ ಸೇವಾ ಸಂಸ್ಥೆಯ ಮೂಲಕ ಮಾಹಿತಿ ಹಕ್ಕು ಅಧಿನಿಯಮದ ಉಪಯುಕ್ತತೆಯ ಬಗ್ಗೆ ಸರ್ವೆ ನಡೆಸಲಾಗಿದ್ದು, 45 ರಿಂದ 50 ಪ್ರತಿಶತ ಜನಗಳಿಗೆ ಉಪಯುಕ್ತವಾಗಿದೆ ಎಂಬುದು ಕಂಡು ಬಂದಿದೆ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಜಿಲ್ಲೆಯಲ್ಲಿ 2024-25 ರಲ್ಲಿ ಮಾಹಿತಿ ಹಕ್ಕು ಅಧಿನಿಯಮದಡಿ ಸ್ವೀಕೃತವಾದ ಹಾಗೂ ವಿಲೇವಾರಿಯಾದ ಅರ್ಜಿಗಳ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹ ಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ರೂಪಾಶ್ರೀ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!