Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಇಂದಿನಿಂದ ಶಾಲೆಗಳಲ್ಲಿ ಶೈಕ್ಷಣಿಕ ಕಲಿಕಾ ಚಟುವಟಿಕೆಗಳು ಪ್ರಾರಂಭ

2025-26 ನೇ ಶೈಕ್ಷಣಿಕ ವರ್ಷದ ಕಲಿಕಾ ಚಟುವಟಿಕೆಗಳು ಸರ್ಕಾರಿ ಶಾಲೆಗಳಲ್ಲಿ ಇಂದಿನಿಂದ  ಪುನಾರಂಭ ಗೊಳ್ಳುತ್ತಿರುವುದರಿಂದ ವಿದ್ಯಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದೆವು ಎಂದು ಮಂಡ್ಯ ತಹಸೀಲ್ದಾರ್ ಶಿವಕುಮಾರ್‌ಬಿರಾದರ್ ಹೇಳಿದರು.
ಮಂಡ್ಯ ನಗರದಲ್ಲಿರುವ ಹೊಸಹಳ್ಳಿಯ ಸರ್ಕಾರಿ ಪ್ರಾಥಮಿಕ ಮತ್ತು ಪೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ 2025-26ನೇ ಶೈಕ್ಷಣಿಕ ವರ್ಷದ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಚಟುವಟಿಕೆಗಳು ಪುನ:ಆರಂಭ ಮತ್ತು ಸರ್ಕಾರಿ ಪ್ರಾಥಮಿಕ ಮತ್ತು ಪೌಢಶಾಲೆ ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಂಡ್ಯ ತಾಲೂಕಿನ ಎಲ್ಲಾ ಶಾಲೆಗಳು ಇಂದಿನಿಂದ  ಪುನಾರಂಭಗೊಳ್ಳುತ್ತಿವೆ, ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಬಿಸಿಯೂಟ ವ್ಯವಸ್ಥೆ ಮಾಡಲಾಗಿದ್ದು, ಶಿಕ್ಷಕರ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎಂದು ಬಿಇಓ ಅವರು ಮಾಹಿತಿ ನೀಡಿದ್ದಾರೆ ಎಂದರು.
ಬಳಿಕ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು, ಶಾಲೆ ಆರಂಭಕ್ಕೆ ಎಲ್ಲಾ ಸಿದ್ದತೆ ಮಾಡಿಕೊಂಡು ಪಾಠ-ಶಾಲಾ ಚಟುವಟಿಕೆ ಆರಂಭಗೊಳ್ಳುತ್ತಿವೆ, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಗುತ್ತಿದೆ.
ಎಲ್ಲಾ ವಿದ್ಯಾರ್ಥಿಗಳಿಗೆ ಬಿಸಿಯೂಟ, ಮೊಟ್ಟೆ ವಿತರಣೆ ಆಗಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮತ್ತಷ್ಟು ಉತ್ತಮ ಫಲಿತಾಂಶ ದಾಖಲಿಸಲು ಶಿಕ್ಷಕರು ಶ್ರಮಿಸಲಿದ್ದು, ವಿದ್ಯಾರ್ಥಿಗಳಿಗೆ ಕೌಸಲ್ಯ ಜ್ಞಾನ, ಕಲಿಕಾಸಾಮರ್ಥ್ಯ ಹೆಚ್ಚಿಸುವ ಭೋಧನಾ ಶೈಲಿ, ಗುಣಮಟ್ಟದ ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಶಿಕ್ಷಕರ ಕೊರತೆ ಇಲ್ಲದೇ ಇರುವುದರಿಂದ  ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಫಲಿತಾಂಶ ದಾಖಲಿಸಲು ಕ್ರಮಕೈಗೊಳ್ಳುತ್ತೇವೆ, ಸರ್ಕಾರಿ ಮಾರ್ಗಸೂಚಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಮಾರ್ಗದರ್ಶನದಲ್ಲಿ ಭೋಧನಾ ಚಟುವಟಕೆ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು, ಶಾಲೆಗೆ ಹಸಿರು ತಳಿರು ತೋರಣ ಸ್ವಾಗತಕಮಾನು ತಯಾರು ಮಾಡಲಾಗಿತ್ತು, ವಿದ್ಯಾರ್ಥಿಗಳಿಗೆ ಸಮ ವಸ್ತ್ರ -ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಮಂಜು, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮಿ , ಡಿಡಿಪಿಐ ಶಿವರಾಮೇಗೌಡ, ಶಾಲಾಭಿವೃದ್ದಿ ಸಮಿತಿಯ ಶೇಖರ್, ಜೆ.ಕೆ.ಶ್ರೀಕಾಂತ್, ಪ್ರೌಢಶಾಲೆ ಮುಖ್ಯಶಿಕ್ಷಕಿ ಜ್ಯೋತಿ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಲೀಲಾವತಿ, ಸಹಶಿಕ್ಷಕ ವೃಂದ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!