
ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲಾ ಸರ್ಕಾರಿ ನೌಕರರಿಗೆ ಧನ್ಯವಾದಗಳು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಬಳಿ ಇರುವ ಲೆಮನ್ ಗ್ರಾಸ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಂಡ್ಯ ಜಿಲ್ಲಾ ಶಾಖೆಗೆ 2024 ರಿಂದ 2029ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ನಿರ್ದೇಶಕರುಗಳಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ರಾಜಕೀಯ ಕ್ಷೇತ್ರದಲ್ಲಿ ಎರಡು ಗುಂಪುಗಳಾಗಿ ಪೈಪೋಟಿಯಾಗುವ ರೀತಿಯಲ್ಲಿ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಪೈಪೋಟಿ ಆಗಬಾರದು ಎಂದು ಶಂಭುಗೌಡ, ನಾಗೇಶ್ ಬಣಗಳ ನಡುವೆ ಚುನಾವಣೆ ನಡೆಯಬಾರದು ಎಂಬ ಉದ್ದೇಶದಿಂದ ನಾನು ಹಾಗೂ ಶಾಸಕ ರವಿಕುಮಾರ್ ಸೇರಿದಂತೆ ಎಲ್ಲರೂ ನಿಮ್ಮೆಲ್ಲರನ್ನು ಒಂದುಗೂಡಿಸುವ ಪ್ರಯತ್ನವನ್ನು ಮಾಡಿ ಅವಿರೋಧ ಆಯ್ಕೆ ಪ್ರಕ್ರಿಯೆಯನ್ನು ಮಾಡಿಸಿದ್ದೇವೆ ಎಂದರು.
ನಿಮ್ಮೆಲ್ಲರ ಸಹಕಾರದಿಂದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿದ್ದು, ನಿಮ್ಮೆಲ್ಲರಿಗೂ ವೈಯಕ್ತಿಕವಾಗಿ ಧನ್ಯವಾದಗಳು ಹೇಳುತ್ತೇನೆ. ಮುಂದಿನ ದಿನಗಳಲ್ಲಿ ನಿಮಗೆ ಯಾವುದೇ ವಿಚಾರದಲ್ಲಿ ಇಬ್ಬರಿಂದ ವ್ಯತ್ಯಾಸಗಳಾದರೆ, ನಿಮ್ಮನ್ನು ನಾನೇ ಜವಾಬ್ದಾರಿಯುತವಾಗಿ ನಡೆಸಿಕೊಳ್ಳುತ್ತೇನೆ ಎಂದು ನೌಕರರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್, ಶಂಭುಗೌಡ, ಮೈ ಶುಗರ್ ಅಧ್ಯಕ್ಷ ಸಿಡಿ ಗಂಗಾಧರ್, ಮಾಜಿ ಶಾಸಕ ಎಚ್ ಪಿ ರಾಮು,ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ತ್ಯಾಗರಾಜು ಹಾಲಳ್ಳಿ ಅಶೋಕ್, ಕಂಬದಳ್ಳಿ ಪುಟ್ಟಸ್ವಾಮಿ ಸೇರಿದಂತೆ ಹಲವರಿದ್ದರು.

Leave a Reply