
ಪ್ರಿಯಕರದೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯತಮನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶ್ರೀರಂಗಪಟ್ಟಣದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಕೆ.ಆರ್.ಪೇಟೆ ತಾಲ್ಲೂಕು ಅಕ್ಕಿ ಹೆಬ್ಬಾಳು ಗ್ರಾಮದ ನಾಸಿರ್ ಪಾಷನನ್ನು ಆತನ ಹೆಂಡತಿ ಅಂಜುಮ್ ಆರಾ ಹಾಗೂ ಆಕೆಯ ಪ್ರಿಯಕರ ರಹೀಂ ಖಾನ್ ನನ್ನು ಕೊಲೆ ಮಾಡಿದ್ದರು. ಈ ಬಗ್ಗೆ 26-10-2021ರಂದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ಪಿ.ಐ ನಿರಂಜನ್ ಅವರು ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ನಡೆದು, ಆರೋಪಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಗೋಪಾಲಕೃಷ್ಣ ರೈ ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ ಮೊದಲ ಆರೋಪಿ ಅಂಜುಮ್ ಆರಾ ಗೆ 10 ಸಾವಿರ ರೂ. ದಂಡ ಹಾಗೂ ಎರಡನೇ ಆರೋಪಿ ರಹೀಂ ಖಾನ್ ಗೆ 15,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪ್ರಫುಲ್ಲ ಎಂ.ಕೆ ವಾದ ಮಂಡಿಸಿದ್ದರು.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿ, ಪ್ರಶಂಸಿಸಿದ್ದಾರೆ.

Leave a Reply